Districts

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರೆಲ್ಲಾ ಎದ್ದು ರಾಜಕೀಯ ಮಾಡ್ತಿದಾರೆ-ಹೆಚ್‌ಡಿಕೆ

ರಾಮನಗರ: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ  ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ  ಟಾಂಗ್ ನೀಡಿದ್ದಾರೆ. ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಏನನ್ನೂ ಮಾಡದ ಕಾಂಗ್ರೆಸ್ ನಾಯಕರು, ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಅವರು, ನಾನು ಅವರನ್ನಾಗಲಿ ಅಥವಾ ಮತ್ತೆ ಯಾರನ್ನೇ ಆಗಲಿ ಟಾರ್ಗೆಟ್ ಮಾಡ್ತಿಲ್ಲ, ನನಗೂ ಅವರಿಗೂ ಸಂಬಂಧ ಇಲ್ಲ. ನನ್ನ ಕೆಲಸ ನಾನು ಮಾಡುತ್ತಿದ್ದೇನೆ. ಆದರೆ ನನ್ನನ್ನ ಅವರು ಟಾರ್ಗೆಟ್ ಮಾಡಿದ್ದಾರೆ ಎಂದಿದ್ದಾರೆ.

ರಾಮನಗರದಿಂದ ಕುಮಾರಸ್ವಾಮಿಯವರನ್ನು ಖಾಲಿ ಮಾಡಿಸಬೇಕಂತೆ ಎಂಬ ಮಾತುಗಳು ಕೇಳಿದ್ದೇನೆ. ನನ್ನನ್ನು ಖಾಲಿ ಮಾಡಿಸಲು ಆಗುತ್ತಾ ಅನ್ನುವುದು ಅವರಿಗೆ ಗೊತ್ತಿಲ್ಲ. ರಾಮನಗರ ಜಿಲ್ಲೆಗೂ ನನಗೂ ಇರುವ ಸಂಬಂಧ ಸಾವಿರಾರು ಬಾರಿ ಹೇಳಿದ್ದೇನೆ. ನನಗೂ ಈ ಜಿಲ್ಲೆಗೂ ತಾಯಿ ಮಗನ ಸಂಬಂಧ ಇದೆ ಎಂದು ಹೆಚ್ ಡಿಕೆ ತಿರುಗೇಟು ನೀಡಿದರು.

ಅವರು ಹಣದ ಮೂಲಕ, ದಬ್ಬಾಳಿಕೆ ಮೂಲಕ ಕುಮಾರಸ್ವಾಮಿಯನ್ನು ಬಗ್ಗುಬಡಿಯಲು ಇನ್ನು ಹತ್ತು ಜನ್ಮ ಎತ್ತಿ ಬರಬೇಕು. ಈ ಜಿಲ್ಲೆಯ ಜನರಿಗೂ ದೇವೇಗೌಡರ ಕುಟುಂಬಕ್ಕೆ ಪೂರ್ವ ಜನ್ಮದ ಸಂಬಂಧ ಇದೆ. ಮೇಕೆದಾಟು ಪಾದಯಾತ್ರೆ ಬಳಿಕ ಜೆಡಿಎಸ್ ಭದ್ರಕೋಟೆ ಛಿದ್ರವಾಗುತ್ತದೆ ಎಂದು ಹಗಲು ಕನಸು ಕಾಣುತ್ತಿದ್ದಾರೆ. ಇಲ್ಲಿಂದಲೇ ಮತ್ತೆ ಪಾದಯಾತ್ರೆ ಪ್ರಾರಂಭ ಮಾಡ್ತೇವೆ ಎಂದಿದ್ದಾರೆ ಅವರು. ಒಂದಲ್ಲ, ಇನ್ನು ಹತ್ತು‌ ಪಾದಯಾತ್ರೆ ಮಾಡಲಿ, ಇದು ದುರಂಕಾರದ ಮಾತಲ್ಲ. ಅವರ ನಡವಳಿಕೆಗಳನ್ನ‌ ಅರ್ಥ ಮಾಡಕೊಂಡಿದ್ದೇನೆ ಎಂದರು ಅವರು.

ಈ ಜಿಲ್ಲೆಯ ಜನರನ್ನು ಗೆಲ್ಲೋದು ಅಷ್ಟು ಸುಲಭವಲ್ಲ. ಪ್ರೀತಿ, ವಿಶ್ವಾಸ, ದುಡಿಮೆ ಇದ್ದರಷ್ಟೇ ಜಿಲ್ಲೆಯಲ್ಲಿ ಉಳಿಯಲು ಸಾಧ್ಯ. ಹಣಕ್ಕೆ ಇಲ್ಲಿ ಬೆಲೆ ಸಿಗಲ್ಲ ಎಂದು ಪ್ರತ್ಯುತ್ತರ ನೀಡಿದ್ರು.

 

Share Post