Bengaluru

ಡಿಸೆಂಬರ್‌ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಿ; ಹೈಕೋರ್ಟ್‌

ಬೆಂಗಳೂರು; ಡಿಸೆಂಬರ್‌ ಅಂತ್ಯದೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ಮಾಡಿದೆ. ಬಿಬಿಎಂಪಿ ವಾರ್ಡ್ ವಾರು ಮೀಸಲು ನಿಗದಿಯಲ್ಲಿ ತಾರತಮ್ಯ ಎಸಗಲಾಗಿದೆ ಎಂದು ಆಕ್ಷೇಪಿಸಿ ಈಜಿಪುರದ ಕೆ.ಮಹದೇವ, ಕಮ್ಮನಹಳ್ಳಿಯ ಪಳನಿ ದಯಾಳನ್‌, ದೊಡ್ಡ ಬಾಣಸವಾಡಿಯ ವಿ.ಶ್ರೀನಿವಾಸ್‌ ಮತ್ತು ನಾಗನಾಥಪುರದ ಕೆ.ಚಂದ್ರಶೇಖರ್ ಸೇರಿದಂತೆ ಎಂಟು ಜನ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

“ಸರ್ಕಾರ ಒಬಿಸಿ (ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ) ಆಯೋಗಕ್ಕೆ ಅಂಕಿ ಅಂಶ ಒದಗಿಸಬೇಕು. 2022ರ ನವೆಂಬರ್ 30ರೊಳಗೆ ಮೀಸಲಾತಿ ಪ್ರಕಟಿಸಬೇಕು ಮತ್ತು ಡಿಸೆಂಬರ್ 31ರೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸಬೇಕು” ಎಂದು ನ್ಯಾಯಪೀಠ ಆದೇಶಿಸಿದೆ. ಹೀಗಾಗಿ ಸರ್ಕಾರ ಈ ಮೊದಲು ಹೊರಡಿಸಿದ್ದ 243 ವಾರ್ಡ್‌ಗಳ ಮೀಸಲು ಪಟ್ಟಿಯ ಅಧಿಸೂಚನೆಯನ್ನು ರದ್ದುಪಡಿಸಿದೆ.

Share Post