NationalPolitics

ಈ ಬಾರಿ ತಮಿಳುನಾಡಿಗೆ ನೀರು ಬಿಡೋದಿಲ್ಲ; ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ದೆಹಲಿ ಪ್ರವಾಸದಲ್ಲಿದ್ದಾರೆ. ಬುಧವಾರ ಸಂಜೆ ದೆಹಲಿಗೆ ಹೋಗಿರುವ ಅವರು ಕೇಂದ್ರ ಸಚಿವರುಗಳನ್ನು ಸಂಪರ್ಕಿಸಿ ರಾಜ್ಯದ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಅವರು ಇಂದು ದೆಹಲಿಯಲ್ಲಿ ಮಾಧ್ಯಮಗಳು ಜೊತೆ ಮಾತನಾಡಿದ್ದಾರೆ. ರಾಜ್ಯದ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾಗಿ ಅವರು ಹೇಳಿಕೊಂಡಿದ್ದಾರೆ.

ಬೆಂಗಳೂರಿನ ಕೊಳಚೆ ನೀರನ್ನು ಶುದ್ಧೀಕರಣ ಮಾಡುವ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ. ನಾವು ಬೆಂಗಳೂರು ನಗರದ ಕೊಳಚೆ ನೀರನ್ನು ಶುದ್ಧೀಕರಣ ಮಾಡಿ ಕೆರೆಗಳನ್ನು ತುಂಬಿಸುತ್ತಿದ್ದೇವೆ. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗದ ಕೆರೆಗಳನ್ನು ತುಂಬಿಸುವ ಕೆಲಸ ನಡೆದಿದೆ. ಈ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡಿದ್ದೇನೆ. ಕೇಂದ್ರ ಸರ್ಕಾರ ಕೂಡಾ ಈ ಬಗ್ಗೆ ಅಭಿನಂದನೆ ಸಲ್ಲಿಸಿದೆ ಎಂದು ಹೇಳಿದರು. ಇನ್ನು ರಾಜ್ಯದಲ್ಲಿ ಈ ಬಾರಿ ನೀರು ಮಳೆ ಕಡಿಮೆಯಾಗಿದೆ. ಹೀಗಾಗಿ ಡ್ಯಾಮ್‌ಗಳಲ್ಲಿ ನೀರಿಲ್ಲ. ಹೀಗಾಗಿ ನಾವು ಸದ್ಯಕ್ಕೆ ಬೆಂಗಳೂರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಕ್ಕೆ ಮೊದಲ ಆದ್ಯತೆ ನೀಡುತ್ತೇವೆ. ಈ ವರ್ಷ ನಮಗೇ ಸಮಸ್ಯೆ ಆಗಿರುವುದರಿಂದ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ತಮಿಳುನಾಡು ಸರ್ಕಾರ ಕೋರ್ಟ್‌ ಮೊರೆ ಹೋಗಿದೆ. ನ್ಯಾಯಾಧಿಕರಣ ರಚನೆ ಸಂಬಂಧ ಸೂಚನೆ ಬಂದಿದ್ದೆ. ಆದ್ರೆ ನ್ಯಾಯಾಧಿಕರಣ ಬೇಡ ಎಂದು ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ. ಇನ್ನು ಕಳಸಾ ಬಂಡೂರಿ ಹಾಗೂ ಕೃಷ್ಣ ನದಿ ವಿಚಾರವಾಗಿಯೂ ಸಚಿವರ ಜೊತೆ ಚರ್ಚೆ ಮಾಡಿದ್ದೇವೆ. ಕೃಷ್ಣಾ ನದಿ ವಿಚಾರ ಗೆಜೆಟ್‌ ನೋಟಿಫಿಕೇಷನ್‌ ಪೆಂಡಿಂಗ್‌ ಇದೆ. ಈ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.

ಮೇಕೆದಾಟು ವಿಚಾರವಾಗಿ ಕಾನೂನು ತಜ್ಞರ ಸಲಹೆ ಪಡೆಯಬೇಕಿದೆ. ಸಲಹೆ ಪಡೆದುಕೊಂಡ ನಂತರ ಈ ಬಗ್ಗೆ ಕೇಂದ್ರ ಸಚಿವರ ಜೊತೆ ಮಾತನಾಡುತ್ತೇನೆ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Share Post