BengaluruHealth

ಪೊಲೀಸರನ್ನು ನಾಯಿ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ..!

ಶಿವಮೊಗ್ಗ: ಗೋ ಸಾಗಾಟ ಮಾಡೋದು ಯಾರು ಅಂತ ಪೊಲೀಸರಿಗೆ ಗೊತ್ತಿದೆ. ಆದರೆ ಲಂಚ ತಿಂದು ನಾಯಿಯ ಹಾಗೆ ಬಿದ್ದಿರುತ್ತಾರೆ. ಪೊಲೀಸರಿಗೆ ಆತ್ಮಗೌರವ ಬೇಕಲ್ಲ ಎಂದು ಪೊಲೀಸ್‌ ಅಧಿಕಾರಿಯೊಬ್ಬರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತರಾಟೆಗೆ ತೆಗೆದುಕೊಂಡಿರುವ ವಿಡಿಯೋವೊಂದು ಬಹಿರಂಗವಾಗಿದೆ. ತಮ್ಮ ಇಲಾಖೆಯ ಅಧಿಕಾರಿಗಳಿಗೇ ಅವಾಚ್ಯ ಶಬ್ದಗಳಿಂದ ಬೈದಿರುವುದರಿಂದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ.‌

ಆರಗ ಜ್ಞಾನೇಂದ್ರ ಅವರು ಅಸಮಾಧಾನ ವ್ಯಕ್ತಪಡಿಸಿರೋದು ಚಿಕ್ಕಮಗಳೂರಿನ ಪೊಲೀಸ್‌ ಅಧಿಕಾರಿಯೊಬ್ಬರ ವಿರುದ್ಧ. ಮೊಬೈಲ್‌ ನಲ್ಲಿ ಮಾತನಾಡುತ್ತಾ ಸಚಿವ ಆರಗ ಜ್ಞಾನೇಂದ್ರ ಅವಾಚ್ಯ ಶಬ್ದ ಬಳಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಸಚಿವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪ‌ದ ತಮ್ಮ ನಿವಾಸದ ಕಚೇರಿಯಿಂದ ಪೊಲೀಸ್ ಅಧಿಕಾರಿಯೊಬ್ಬರಿಗೆ ಫೋನ್​​ನಲ್ಲಿಯೇ ಈ ರೀತಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಗೋಹತ್ಯೆ‌ ನಿಷೇಧ ಕಾಯ್ದೆ ಜಾರಿಗೆ ತಂದು, ಪೊಲೀಸರ ಕೈಗೆ ಕಾನೂನು ನೀಡಿದರೂ ಅಕ್ರಮ ಗೋ ಸಾಗಾಟ ನಡೆಯುತ್ತಿದೆ. ಪೊಲೀಸರಿಗೆ ಕೈತುಂಬಾ ಸಂಬಳ ನೀಡುತ್ತೇವೆ. ಆದರೂ, ಲಂಚ ಪಡೆದು ಗೋ ಸಾಗಾಟಕ್ಕೆ ಅವಕಾಶ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಚಿತ್ರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

Share Post