BengaluruCrime

ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳಿಂದ ಶಾಕ್‌; 21 ಅಧಿಕಾರಿಗಳ ಆಸ್ತಿಗಳ ಮೇಲೆ ದಾಳಿ

ಬೆಂಗಳೂರು; ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಇಂದು ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಸಂಬಂಧಿಕರು ಮತ್ತು ನಿಕಟವರ್ತಿಗಳ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿದೆ. ಸಂಸ್ಥೆಯ 300ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗುತ್ತಿದೆ. ಸ್ಥಿರಾಸ್ತಿ ಒಡೆತನ, ಹಣಕಾಸು ವಹಿವಾಟು, ನಗದು, ಬ್ಯಾಂಕ್‌ ದಾಖಲೆಗಳಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯ ಚಿಕ್ಕಬಳ್ಳಾಪುರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಮೋಹನ್‌ ಕುಮಾರ್‌, ಉತ್ತರ ಕನ್ನಡ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್‌, ಬೆಂಗಳೂರಿನ ಲೋಕೋಪಯೋಗಿ ಇಲಾಖೆಯ ನಿವೃತ್ತ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಮಂಜುನಾಥ್‌ ಜಿ., ಬಿಡಿಎ ಸಿ ದರ್ಜೆ ನೌಕರ ಶಿವಲಿಂಗಯ್ಯ, ಕೊಪ್ಪಳದ ಪೊಲೀಸ್‌ ಇನ್‌ಸ್ಪೆಕ್ಟರ್‌ ಉದಯ ರವಿ, ಕಡೂರು ಪುರಸಭೆಯ ನಿರ್ವಾಹಕ ಬಿ.ಜಿ. ತಿಮ್ಮಯ್ಯ, ರಾಣೆಬೆನ್ನೂರಿನ ನಗರ ಯೋಜನಾ ಕಚೇರಿಯ ಚಂದ್ರಪ್ಪ ಸಿ. ಹೊಲೇಕರ್‌ ಮತ್ತು ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ನಿವೃತ್ತ ಕುಲಸಚಿವ ಜನಾರ್ದನ್‌ ಮೇಲೆ ಎಸಿಬಿ ದಾಳಿ ನಡೆಸಿದೆ.

ಬೆಳಗಾವಿಯ ಸೂಪರಿಂಟೆಂಡಿಂಗ್‌ ಎಂಜಿನಿಯರ್‌ ಭೀಮರಾವ್‌ ವೈ. ಪವಾರ್‌, ಸಣ್ಣ ನೀರಾವರಿ ಇಲಾಖೆಯ ಉಡುಪಿ ವಿಭಾಗದ ಸಹಾಯಕ ಎಂಜಿನಿಯರ್‌ ಹರೀಶ್‌, ಹಾಸನ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ರಾಮಕೃಷ್ಣ ಎಚ್.ವಿ., ಕಾರವಾರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ರಾಜೀವ್‌ ಪುರಸಯ್ಯ ನಾಯಕ್‌, ಪೊನ್ನಂಪೇಟೆಯ ಜಿಲ್ಲಾ ಪಂಚಾಯತ್‌ ವಿಭಾಗದ ಕಿರಿಯ ಎಂಜಿನಿಯರ್‌ ಬಿ.ಆರ್‌. ಬೋಪಯ್ಯ, ಬೆಳಗಾವಿಯ ಜಿಲ್ಲಾ ನೋಂದಣಾಧಿಕಾರಿ ಮಧುಸೂದನ್‌, ಸಣ್ಣ ನೀರಾವರಿ ಇಲಾಖೆಯ ಹೂವಿನಹಡಗಲಿ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಪರಮೇಶ್ವರಪ್ಪ ಮೇಲೆ ಎಸಿಬಿ ದಾಳಿ ನಡೆಸಿದೆ.

ಬಾಗಲಕೋಟೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಯಲ್ಲಪ್ಪ ಎನ್‌. ಪಡಸಾಲಿ, ಬಾಗಲಕೋಟೆಯ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಪ್ಪ ನಾಗಪ್ಪ ಗೋಗಿ, ಗದಗ ಜಿಲ್ಲೆಯಲ್ಲಿನ ಪಂಚಾಯಿತಿ ಕಾರ್ಯದರ್ಶಿ ಪ್ರದೀಪ್‌ ಎಸ್.‌ ಆಲೂರು, ಬೆಂಗಳೂರಿನ ಉಪ ಮುಖ್ಯ ವಿದ್ಯುತ್‌ ನಿರೀಕ್ಷಕ ತಿಪ್ಪಣ್ಣ ಪಿ. ಸಿರಸಗಿ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯದ ಸಹಾಯಕ ನಿಯಂತ್ರಕ ಮೃತ್ಯುಂಜ ಚನ್ನಬಸಯ್ಯ ತಿರಣಿ ಮೇಲೂ ತನಿಖಾ ಸಂಸ್ಥೆ ದಾಳಿ ಮಾಡಿದೆ.

Share Post