Bengaluru

ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಅಗತ್ಯ; ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು;  ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂಪೂರ್ಣ ನಿರ್ಮೂಲನೆಗೆ ಜನ ಸಮುದಾಯದಲ್ಲಿ ಅರಿವು ಮೂಡಿಸುವುದು ಅವಶ್ಯ. ಮಲೇರಿಯಾ ಹೆಚ್ಚಿರುವ ಜಿಲ್ಲೆಗಳಿಗೆ ಭೇಟಿ ನೀಡಿ, ಅಲ್ಲಿ ಜನರೇ ಮುನ್ನೆಚ್ಚರಿಕೆ ಕ್ರಮ ವಹಿಸಲು ತಿಳಿಸಿಕೊಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸೂಚನೆ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿಧಾನಸೌಧದಲ್ಲಿ ಆಯೋಜಿಸಿದ್ದ, 2025 ರ ವೇಳೆಗೆ ಕರ್ನಾಟಕವನ್ನು ಮಲೇರಿಯಾ ಮುಕ್ತ ಮಾಡುವ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಸಚಿವರು, ಮಲೇರಿಯಾಗೆ ಹಿಂದೆ ಸರಿಯಾದ ತಪಾಸಣಾ ವ್ಯವಸ್ಥೆಯೇ ಇರಲಿಲ್ಲ. ಇದರಿಂದಾಗಿ ಸಾವುಗಳು ಸಂಭವಿಸುತ್ತಿತ್ತು. 80, 90 ರ ದಶಕದಲ್ಲಿ ಯಾವುದೇ ಜ್ವರ ಬಂದರೂ ಮೊದಲು ಮಲೇರಿಯಾ ತಪಾಸಣೆ ಮಾಡಲು ಆರಂಭವಾಯಿತು. ಈ ರೀತಿ ಸರ್ಕಾರ ತಪಾಸಣೆ ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಕ್ರಮ ವಹಿಸುತ್ತಿದೆ. ಯಾವುದೇ ರೋಗದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಹೆಚ್ಚು ಅಗತ್ಯ ಎಂದರು.

ಮಲೇರಿಯಾ, ಡೆಂಘೀ ಮೊದಲಾದ ಸಾಂಕ್ರಾಮಿಕ ರೋಗಗಳು ಮಳೆಗಾಲದಲ್ಲಿ ಹೆಚ್ಚಾಗುತ್ತದೆ. ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಅಂತಹ ಕಡೆಗಳಲ್ಲಿ ಸ್ವಾಭಾವಿಕವಾಗಿ ಮಳೆ ನೀರು ಶೇಖರಣೆಯಾಗುತ್ತದೆ. ಇದರಿಂದಾಗಿ ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತದೆ. ದೇಶದಲ್ಲಿ 2020 ರಲ್ಲಿ 1,86,532 ಮಲೇರಿಯಾ ಪ್ರಕರಣ ಪತ್ತೆಯಾಗಿತ್ತು. ಈ ಪೈಕಿ ಕರ್ನಾಟಕದಲ್ಲಿ 1,701 ಪ್ರಕರಣಗಳು ವರದಿಯಾಗಿದ್ದವು. ಅಂದರೆ ರಾಜ್ಯದ ಪಾಲು ಶೇ.0.9 ಆಗಿತ್ತು. ಇದೇ ವರ್ಷ ಜಗತ್ತಿನಲ್ಲಿ 21 ಕೋಟಿ ಜನರು ಮಲೇರಿಯಾ ರೋಗಕ್ಕೊಳಗಾಗಿದ್ದು, 6.27 ಲಕ್ಷ ರೋಗಿಗಳು ಮೃತಪಟ್ಟಿದ್ದರು. ರಾಜ್ಯದಲ್ಲಿ ಮಲೇರಿಯಾ ನಿಯಂತ್ರಣದಲ್ಲಿದ್ದು, ಇದಕ್ಕಾಗಿ ಅಧಿಕಾರಿ, ಸಿಬ್ಬಂದಿಯನ್ನು ಅಭಿನಂದಿಸುತ್ತೇನೆ ಎಂದರು.

Share Post