Bengaluru

ಆದ್ಧೂರಿ ಸ್ವಾತಂತ್ರ್ಯ ದಿನಾಚರಣೆಗೆ ಬೆಂಗಳೂರು ಸಿದ್ಧ; ಬಿಬಿಎಂಪಿ ಆಯುಕ್ತ

ಬೆಂಗಳೂರು; 75 ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧೆತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್  ತಿಳಿಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭದ ಸಿದ್ಧತೆಗಳ ಕುರಿತು ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

ಆಗಸ್ಟ್ 15 ರಂದು ಬೆಳಗ್ಗೆ 8.45 ಕ್ಕೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಅನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.  ಕೆ.ಎಸ್.ಆರ್.ಪಿ, ಸಿ.ಆರ್.ಪಿ.ಎಫ್ , ಬಿ.ಎಸ್.ಎಫ್, ಸಿ.ಎ.ಆರ್, ಕೆ.ಎಸ್.ಐ.ಎಸ್.ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್, ಹೋಂ ಗಾರ್ಡ್ಸ್, ಟ್ರಾಪಿಕ್ ವಾರ್ಡನ್, ಆಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ವಾಡ್ ಮತ್ತು ಬ್ಯಾಂಡ್ ನ ಒಟ್ಟು 36 ತುಕಡಿಗಳಲ್ಲಿ ಸುಮಾರು 1,200 ಮಂದಿ ಪಂಥಸಂಚಲನದಲ್ಲಿ ಭಾಗವಹಿಸಲಿದ್ದಾರೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

ಕಿಕ್ಕೇರಿ ಕೃಷ್ಣಮೂರ್ತಿ ಅವರ ತಂಡದಿಂದ ನಾಡಗೀತೆ ಮತ್ತು ರೈತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರು ಉತ್ತರ ಜಿಲ್ಲೆಯ ಚಿಕ್ಕಬಿದರಕಲ್ಲು ಸರ್ಕಾರಿ ಫ್ರೌಡಶಾಲೆಯ 800 ಮಕ್ಕಳು ‘ಅಮೃತ ಮಹೋತ್ಸವದ ಭಾರತದ ಸಂಭ್ರಮದ’ ನೃತ್ಯ ಪ್ರದರ್ಶಿಸಲಿದ್ದಾರೆ. ಬೆಂಗಳೂರು ಉತ್ತರ ವಲಯದ ಹೇರೋಹಳ್ಳಿ ಬಿಬಿಎಂಪಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ 800 ಮಕ್ಕಳು ‘ಈಸೂರು ಹೋರಾಟ’ ಹಾಗೂ ಗುರಪ್ಪನಪಾಳ್ಯದ ಲಿಲ್ಲಿ ರೋಜ್ ಪ್ರೌಢಶಾಲೆಯ 850 ಮಕ್ಕಳು ‘ಜೈ ಜವಾನ್ ಜೈ ಕಿಸಾನ್’ ಕಾರ್ಯಕ್ರಮವನ್ನು ನಡೆಸಿಕೊಳ್ಳಲಿದ್ದಾರೆ ಹಾಗೂ ಎಂ. ಇ. ಜಿ ತಂಡದವರು ಟೆಂಟ್ ಪೆಗ್ಗಿಂಗ್, ಕೊಂಬ್ಯಾಟ್ ಫ್ರೀ ಫಾಲ್ ಮತ್ತು ಉತ್ತಮ ದೇಹದಾರ್ಢ್ಯ ಸಹಾಸ ಪ್ರದರ್ಶನವನ್ನು ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಇತರೆ ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಾರಿ ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.
ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಿ.ಹೆಚ್ ಪ್ರತಾಪ್ ರೆಡ್ಡಿ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಗಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ 1,700 ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. 9 ಡಿ.ಸಿ.ಪಿ ,10 ಕೆ.ಎಸ್.ಆರ್.ಪಿ ತುಕಡಿಗಳು ಹಾಗೂ ಕಿರಿಯ ಅಧಿಕಾರಿಗಳನ್ನು ಭದ್ರತ ವ್ಯವಸ್ಥೆಗೆ ನಿಯೋಜಿಸಲಾಗಿದೆ ಎಂದರು.

ಮೈದಾನದ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮರ್ ವ್ಯವಸ್ಥೆ ಹಾಗೂ ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರೆತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಜನರು ಪೊಲೀಸರ ಭದ್ರತ ತಪಾಸಣೆಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಪಶ್ಚಿಮ ವಿಭಾಗದ ಹೆಚ್ಚುವರಿ ಆಯುಕ್ತರಾದ ಸಂದೀಪ್ ಪಾಟಿಲ್, ಸಂಚಾರಿ ಪೊಲೀಸ್ ಜಂಟಿ ಆಯುಕ್ತರಾದ ರವಿಕಾಂತೆ ಗೌಡ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share Post