BengaluruPolitics

ಬಿಜೆಪಿಯವರು ಜನರನ್ನು ಫೂಲ್‌ ಮಾಡುತ್ತಲೇ ಬಂದಿದ್ದಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಮೀಸಲಾತಿ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿ ಸರ್ಕಾರ ಜನರನ್ನು ಫೂಲ್‌ ಮಾಡುತ್ತಲೇ ಬಂದಿದೆ. ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದೆಲ್ಲಾ ಈಡೇರಿಸಿಲ್ಲ. ಈ ಮೂಲಕ ಜನರನ್ನು ಮೂರ್ಖರನ್ನಾಗಿ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಕೋಲಿ ಸಮಾಜದವರಿಗೆ ಪರಿಶಿಷ್ಟ ಜಾತಿ ಸ್ಥಾನಮಾನ ನೀಡಲಾಗುವುದು ಎಂದು ಕಳೆದ ಚುನಾವಣೆ ಸಮಯದಲ್ಲಿ ಬಿಜೆಪಿ ಭರವಸೆ ನೀಡಿತ್ತು. ಆದರೆ ಅದನ್ನು ಈಡೇರಿಸಲೇ ಇಲ್ಲ. ಈ ಕಾರಣಕ್ಕೆ ಬಾಬುರಾವ್ ಚಿಂಚನಸೂರ್ ಅವರು ಬಿಜೆಪಿಯಲ್ಲಿ ನ್ಯಾಯ ಸಿಗುವುದಿಲ್ಲ ಎಂದು ಮತ್ತೆ ನಮ್ಮ ಪಕ್ಷಕ್ಕೆ ಮರಳಿದ್ದಾರೆ. ಇನ್ನು ಒಕ್ಕಲಿಗರು ಹಾಗೂ ಲಿಂಗಾಯತರು ಕೂಡ ಕ್ರಮವಾಗಿ 12% ಹಾಗೂ 15% ಮೀಸಲಾತಿ ಹೆಚ್ಚಳಕ್ಕೆ ಆಗ್ರಹ ಮಾಡಿದ್ದು, ಕೇವಲ 2% ನೀಡುವುದಾಗಿ ಸರಕಾರ ಹೇಳಿದೆ. ಅಲ್ಪಸಂಖ್ಯಾತರ ಮೀಸಲಾತಿ ಕಿತ್ತು ಬೇರೆಯವರಿಗೆ ಕೊಟ್ಟಿದ್ದಾರೆ. 2 % ಮೀಸಲಾತಿ ಹೆಚ್ಚಳ ನಾವು ಒಪ್ಪುವುದಿಲ್ಲ. ನಮಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಆದೇಶ ವಜಾ ಮಾಡಲಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಮಾಡಿರುವ ಮೀಸಲಾತಿ ಹೆಚ್ಚಳ ಕಾನೂನು ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸಿಲ್ಲ. ಇವರು ಯಾವುದನ್ನು ಕಾನೂನು ಪ್ರಕಾರ ಮಾಡಿಲ್ಲ. ಮಾಜಿ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಜನ ಗಲಾಟೆ ಮಾಡುತ್ತಿದ್ದಾರೆ ಎಂದರೆ ಸರ್ಕಾರದ ಈ ನಿರ್ಧಾರ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅರ್ಥ. ಸರ್ಕಾರ ಇತ್ತೀಚೆಗೆ ತೆಗೆದುಕೊಂಡಿರುವ ಎಲ್ಲಾ ನಿರ್ಧಾರಗಳು ಜನರನ್ನು ಮೂರ್ಖರನ್ನಾಗಿಸುವ ಕ್ರಮ. ಇದರ ಪರಿಣಾಮ ಮುಂದಿನ ಚುನಾವಣೆಯಲ್ಲಿ ತಿಳಿಯಲಿದೆ. ಜನ ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಈ ಸರ್ಕಾರದ ತಪ್ಪುಗಳನ್ನು ನಮ್ಮ ಸರ್ಕಾರ ಸರಿಪಡಿಸಿ, ಎಲ್ಲರಿಗೂ ನ್ಯಾಯ ಒದಗಿಸಲಿದೆ.

ಸಿಇಸಿ ಸಭೆ ಯಾವಾಗ, 2ನೇ ಪಟ್ಟಿ ಯಾವಾಗ ಪ್ರಕಟವಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಏಪ್ರಿಲ್ 4 ರಂದು ಸಿಇಸಿ ಸಭೆ ನಡೆಯಲಿದ್ದು, ನಾವು ದೆಹಲಿಗೆ ತೆರಳುತ್ತೇವೆ. 2ನೇ ಪಟ್ಟಿಯನ್ನು ನಾನು ಪ್ರಕಟಿಸುವುದಿಲ್ಲ. ಸಭೆಯಲ್ಲಿ ಚರ್ಚೆ ಮಾಡಿ ಮಲ್ಲಿಕಾರ್ಜುನ ಖರ್ಗೆ ಅವರು ತೀರ್ಮಾನ ಮಾಡಲಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

 

Share Post