Bengaluru

ಅಶ್ವತ್ಥ್‌ನಾರಾಯಣ್‌ ವಿರುದ್ಧದ ಆರೋಪಕ್ಕೆ ಆಧಾರಗಳೇ ಇಲ್ಲ; ಸಿಎಂ ಬೊಮ್ಮಾಯಿ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಯಾರೇ ಅಪರಾಧಿಗಳಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ. ಹೀಗಿದ್ದರೂ ಕಾಂಗ್ರೆಸ್‌ ನಾಯಕರು ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ನವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಯಾವುದೇ ಆರೋಪ ಮಾಡುವಾಗ ಸಣ್ಣ ಸಾಕ್ಷ್ಯವಾದರೂ ಇರಬೇಕು. ಆದ್ರೆ, ಯಾವುದೇ ಸಾಕ್ಷ್ಯ ಇಟ್ಟುಕೊಳ್ಳದೆ ಸುಮ್ಮನೆ ಆರೋಪ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಸಿಎಂ ಬೊಮ್ಮಾಯಿ, ಕಾಂಗ್ರೆಸ್‌ ಹಿಟ್‌ ಆ್ಯಂಡ್‌ ರನ್‌ ಮಾಡಲು ಹೊರಟಿದೆ ಎಂದು ಲೇವಡಿ ಮಾಡಿದರು. ಕಾಂಗ್ರೆಸ್‌ ಅಧಿಕಾರದ ಅವಧಿಯಲ್ಲಿ ಹಲವು ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ. ಆ ಸಂದರ್ಭದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈಗ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಅವರ ಪಕ್ಷದ ಕೆಲವರ ಬಂಧನ ಆಗಿದೆ. ಎಲ್ಲಿ ಅವರ ಬಣ್ಣ ಬಯಲಾಗುತ್ತದೊ ಎಂದು ಹೆದರಿ ಸಾಕ್ಷ್ಯಾಧಾರಗಳಿಲ್ಲದೆ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.

Share Post