BengaluruPolitics

ಬಿಜೆಪಿಯಲ್ಲಿ ಯಡಿಯೂರಪ್ಪನವರಿಗಿಂತ ಸಿ.ಟಿ ರವಿಯೇ ಬಹಳ ದೊಡ್ಡವರಾಗಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು; ಬಿಜೆಪಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರೇ ಹೈಕಮಾಂಡ್ ಆಗಿದ್ದು, ಯಡಿಯೂರಪ್ಪ ಅವರಿಗಿಂತ ಬಹಳ ದೊಡ್ಡವರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಟಿಕೆಟ್ ವಿಚಾರವಾಗಿ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಲೆಳೆದಿದ್ದಾರೆ.

ವಿಜಯೇಂದ್ರಗೆ ಶಿಕಾರಿಪುರ ಟಿಕೆಟ್ ನೀಡುವ ವಿಚಾರವಾಗಿ ಸಿ.ಟಿ ರವಿ ಅವರ ಹೇಳಿಕೆ ಕುರಿತು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಇದು ಬಿಜೆಪಿಯ ಆಂತರಿಕ ವಿಚಾರ. ಬಿಜೆಪಿಯಲ್ಲಿ ಬಹಳ ಹಿಂದಿನಿಂದ ಈ ಬಗ್ಗೆ ಚರ್ಚೆಯಾಗುತ್ತಿದೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲು ಪಿತೂರಿ ನಡೆದಿದ್ದು, ಅದರಲ್ಲಿ ಯಶಸ್ವಿಯೂ ಆಗಿದ್ದಾರೆ. ಇದರಲ್ಲಿ ಕಾಂಗ್ರೆಸ್ ಪಾತ್ರವಿಲ್ಲ. ಜನ ಯಡಿಯೂರಪ್ಪ ಅವರ ಮುಖ ನೋಡಿ ಬಿಜೆಪಿಗೆ ಮತಹಾಕಿದ್ದರು. ಆದರೆ ಯಡಿಯೂರಪ್ಪ ಅವರ ಕಣ್ಣೀರು ರಾಜ್ಯ ರಾಜಕಾರಣದ ಚಿತ್ರಣ ಬದಲಿಸಲಿದೆ ಎಂದಿದ್ದಾರೆ.

ಹಾಲಿ ಸಚಿವರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ವಿಚಾರವಾಗಿ ನಾನು ಈಗ ಏನನ್ನೂ ಹೇಳುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ. ಈ ವಿಚಾರವಾಗಿ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಆದರೆ ನಾನು ಯಾವುದೇ ಸಚಿವರ ಜತೆ ಸಂಪರ್ಕ ಮಾಡಿಲ್ಲ. ಆದರೆ ಹಾಲಿ ಶಾಸಕರುಗಳು ಕಾಂಗ್ರೆಸ್ ಪಕ್ಷದ ಟಿಕೆಟ್ ಕೇಳುತ್ತಿದ್ದು, ಆ ಕ್ಷೇತ್ರಗಳಲ್ಲಿ ನಮ್ಮದೇ ಪಕ್ಷದ ನಾಯಕರು ಕಾರ್ಯಕರ್ತರು ಇದ್ದಾರೆ. ಹೀಗಾಗಿ ಈಗ ಪಕ್ಷಕ್ಕೆ ಅವರ ಅಗತ್ಯವಿಲ್ಲ. ನಾವು ಕೆಲವು ಕ್ಷೇತ್ರಗಳ ಬಗ್ಗೆ ಮಾತ್ರ ಈ ವಿಚಾರವಾಗಿ ಚಿಂತನೆ ಮಾಡುತ್ತಿದ್ದು, ನಾವು ಈಗಲೇ ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ’ ಎಂದರು.

Share Post