Bengaluru

ಭಾಷೆ ಕೂಡಾ ಬಿಜೆಪಿಗೆ ಟೂಲ್‌ ಕಿಟ್‌; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು; ಸಹೋದರರಂತೆ ಇರುವ ರಾಜ್ಯಗಳ ನಡುವೆ ಹುಳಿ ಹಿಂದಿ ಹೇರಿಕೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ನೀಡುತ್ತಿರುವುದು ಆಘಾತಕಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ ಎಂದು ಹೇಳಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟಿಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಹೇಳಿದ್ದಾರೆ. ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ..? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ..? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ಧ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಇದೇ ವೇಳೆ ಹೇಳಿದ್ದಾರೆ.

Share Post