Bengaluru

ಸುಪ್ರಭಾತ ಹಾಗೂ ಆಜಾನ್‌ ಅನಾದಿ ಕಾಲದಿಂದಲೂ ಇದೆ; ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ಆಜಾನ್‌ ವಿಚಾರವಾಗಿ ಕೆಲ ಹಿಂದೂಪರ ಸಂಘಟನೆಗಳು ಎತ್ತಿರುವ ವಿರೋಧಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ ಎಂದಿದ್ದಾರೆ.

 

ಕುಮಾರಸ್ವಾಮಿಯವರ ಸರಣಿ ಟ್ವೀಟ್‌ಗಳಲ್ಲಿ ಏನಿದೆ ನೋಡಿ:

 

TWITTER-1

ʻದೇವಾಲಯಗಳಲ್ಲಿ ಸೂರ್ಯೋದಯಕ್ಕೆ ಮುನ್ನವೇ ಸುಪ್ರಭಾತ ಕೇಳಿಸುವುದು, ಮಸೀದಿಗಳಲ್ಲಿ ಅಲ್ಲಾಹ್ ಕೂಗುವುದನ್ನು ನಾನು ಬಾಲ್ಯದಿಂದಲೂ ಕೇಳಿಕೊಂಡೇ ಬೆಳೆದಿದ್ದೇನೆ. ನಮ್ಮ ಊರಿನಲ್ಲಿ ನಿತ್ಯವೂ ನಾನು ಕೇಳುತ್ತಿದ್ದ ಸದ್ದುಗಳಾಗಿದ್ದವು ಇವು.ʼ

 

TWITTER-2

ಅದೇ ರೀತಿ ಊರಿನ ಸಿನಿಮಾ ಟೆಂಟಿನಲ್ಲಿ ರಾತ್ರಿಯ ಸೆಕೆಂಡ್ ಶೋ ಆರಂಭಕ್ಕೆ ಮುನ್ನ ಘಂಟಸಾಲ ಅವರು ಭಕ್ತಿಪರವಶರಾಗಿ ಹಾಡಿರುವ ʼನಮೋ ವೆಂಕಟೇಶ..ʼ ಎನ್ನುವ ಶ್ರೀ ವೆಂಕಟೇಶ್ವರ ಸ್ವಾಮಿಯವರ ಕೀರ್ತನೆಯನ್ನು ಧ್ವನಿವರ್ಧಕದಲ್ಲಿ ಕೇಳಿಸುತ್ತಿದ್ದನ್ನು ನನ್ನಂತೆಯೇ ಅನೇಕರು ಕೇಳಿರುತ್ತಾರೆ.

 

TWITTER-3

ಅಷ್ಟೇ ಅಲ್ಲ, ಸಂಜೆಯಾದರೆ ಇಡೀ ಊರಿನ ಜನರೆಲ್ಲ ಗುಡಿಯಲ್ಲಿ ಸೇರಿ ಭಜನೆ ಮಾಡುತ್ತಿದ್ದದ್ದು, ಕರತಾಳ ಹಿಡಿದು ರಾತ್ರಿ ಹತ್ತು ಗಂಟೆವರೆಗೂ ಭಗವಂತನ ಭಜನೆಯಲ್ಲಿ ಲೀನವಾಗುತ್ತಿದ್ದ ದಿನಗಳು ಇನ್ನೂ ನನ್ನ ಸ್ಮೃತಿಪಟಲದಲ್ಲಿ ಹಚ್ಚಹಸಿರಾಗಿವೆ. ನಾನೂ ಬಹಳ ಶ್ರದ್ಧೆಯಿಂದ ಭಜನೆಯಲ್ಲಿ ಪಾಲ್ಗೊಳ್ಳುತ್ತಿದ್ದೆ.

 

TWITTER-4

ನಸುಕಿನಲ್ಲಿ ಸುಪ್ರಭಾತ & ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ.

 

TWITTER-5

ನಮ್ಮ ಮನೆಗಳಲ್ಲೂ ಬೆಳಗ್ಗೆಯೇ ಪೂಜೆ ನೆರೆವೇರಿಸಿ ಮಂಗಳಕರವಾದ ಘಂಟೆ ಭಾರಿಸುವುದನ್ನು ನಿತ್ಯವೂ ಕೇಳುತ್ತೇವೆ. ದೈವಕ್ಕೆ ಪ್ರಿಯವಾದ ಆ ಘಂಟೆಯ ಸದ್ದು ಯಾರಿಗೂ ಕಿರಿಕಿರಿ ಉಂಟು ಮಾಡಿಲ್ಲ. ಅದೂ ಅನಾದಿ ಕಾಲದಿಂದಲೂ ನಡೆದುಕೊಂಡೇ ಬಂದಿದೆ.

 

TWITTER-6

ಅಲ್ಲದೆ, ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ.

 

TWITTER-7

ಹಿಂದುಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲೀಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ.

 

TWITTER-8

ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು.

 

Share Post