Bengaluru

ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ; ಹೆಚ್ಡಿಕೆ

ಬೆಂಗಳೂರು: ಶಾಲಾ ಪಠ್ಯಪುಸ್ತಕಗಳಲ್ಲಿ ಪಠ್ಯ ಬದಲಾವಣೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್‌ ಮಾಡಿದ್ದಾರೆ. ಪಠ್ಯಪುಸ್ತಕಗಳನ್ನು ಪಕ್ಷ ಪುಸ್ತಕಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದ್ದು, ಅದಕ್ಕೆ ನನ್ನ ಧಿಕ್ಕಾರವಿದೆ ಎಂದು ಅವರು ಹೇಳಿದ್ದಾರೆ. ಅವರು ಮಾಡಿರುವ ಟ್ವೀಟ್‌ಗಳ ಯಥಾವತ್‌ ಸಾರಾಂಶ ಈ ಕೆಳಗಿನಂತಿದೆ. 

 

ಟ್ವೀಟ್‌-೧

ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು.

ಟ್ವೀಟ್‌-೨

ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ?

ಟ್ವೀಟ್‌-೩

ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ.

ಟ್ವೀಟ್‌-೪

ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ?

ಟ್ವೀಟ್‌-೫

ಪ್ರಜಾಪ್ರಭುತ್ವ ವಿರೋಧಿ ನಡವಳಿಕೆ, ಚಾರಿತ್ರ್ಯಹೀನತೆಯೇ ಮೈವೇತ್ತ ಬಿಜೆಪಿಗೆ ರಾಜ್ಯದ ಬೆಳವಣಿಗೆಯಲ್ಲಿ ನಂಬಿಕೆ ಇಲ್ಲ. ಹಿಜಾಬ್‌, ಆಹಾರ, ವ್ಯಾಪಾರ, ಹಲಾಲ್‌ ಎಲ್ಲಾ ಆಯಿತು. ಈಗ ಪಠ್ಯಕ್ಕೆ ನೇತಾಡುತ್ತಿದೆ. ಅಭಿವೃದ್ಧಿ ಎಂದರೆ ಆ ಪಕ್ಷಕ್ಕೆ ಅಪಥ್ಯ.

ಟ್ವೀಟ್‌-೬

ಬಿಜೆಪಿಗರು ಮತ್ತು ಬ್ರಿಟೀಷರು ಇಬ್ಬರೂ ಒಂದೇ. ಒಡೆದು ಆಳುವುದೇ ಇವರ ನೀತಿ & ಧರ್ಮ. ಬ್ರಿಟೀಷ್‌ ಪರಂಪರೆಯನ್ನು ಬಿಜೆಪಿಗರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲೂ ಮುಂದುವರಿಸಿದ್ದಾರೆ. ಜನರ ಸ್ವಾತಂತ್ರ್ಯವನ್ನು ಸಹಿಸಲು ಅವರಿಗೆ ಆಗುತ್ತಿಲ್ಲ.

ಟ್ವೀಟ್‌-೭

ಪಠ್ಯವನ್ನು ವಿಕೃತಿಗೊಳಿಸುತ್ತಿರುವುದು ಎಂದರೆ, ಕನ್ನಡ ಆಸ್ಮಿತೆಯನ್ನು ಹತ್ತಿಕ್ಕುವ ಪಾತಕ ಯತ್ನ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು, ಪ್ರಶ್ನಿಸಬೇಕು. ಹೋರಾಟಕ್ಕೂ ಇಳಿಯಬೇಕು. “ಅಯ್ಯೋ.. ಕರ್ನಾಟಕ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ!!”

Share Post