BengaluruPolitics

ಜಗದೀಶ್‌ ಶೆಟ್ಟರ್‌ ಆಗಮನದಿಂದ ಕಾಂಗ್ರೆಸ್‌ಗೆ ಬಲ; 150 ಸ್ಥಾನ ಗೆಲ್ತೀವಿ – ಸಿದ್ದರಾಮಯ್ಯ

ಬೆಂಗಳೂರು; ಜಗದೀಶ್ ಶೆಟ್ಟರ್ ಅವರನ್ನು ಆತ್ಮೀಯವಾಗಿ ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸುತ್ತೇನೆ. ಶೆಟ್ಟರ್ ಅವರು ಕರ್ನಾಟಕ ಕಂಡ ಸಜ್ಜನ ರಾಜಕಾರಣಿ. ಅವರು ಆರ್ ಎಸ್ಎಸ್ ನಿಂದ ಬಂದಿದ್ದರೂ ಜಾತ್ಯಾತೀತ ತತ್ವದ ಮೇಲೆಯೇ ಕೆಲಸ ಮಾಡಿದ್ದಾರೆ. ನಾನು ಅವರನ್ನು ಹತ್ತಿರದಿಂದ ಕಂಡಿದ್ದೇನೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಾನು ವಿರೋಧ ಪಕ್ಷದ ನಾಯಕನಾಗಿ, ನಾನು ಮುಖ್ಯಮಂತ್ರಿಯಾಗಿದ್ದಾಗ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಎಂದಿಗೂ ತಮ್ಮ ವೈಯಕ್ತಿಕ ಕೆಲಸಕ್ಕಾಗಿ ಭೇಟಿ ಮಾಡಿದವರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಐದು ವರ್ಷಗಳ ಕಾಲ ವಿಧಾನಸಭೆ ಒಳಗೆ ಹಾಗೂ ಹೊರಗೆ ಬಿಜೆಪಿ ಪರವಾಗಿ ಹೋರಾಟ ಮಾಡಿದ್ದರು. ಬಹಳ ನಿಷ್ಠಾವಂತರಾಗಿದ್ದರು. ಬಿಜೆಪಿಯ ನೀತಿ ಕಾರ್ಯಕ್ರಮಗಳ ಬಗ್ಗೆ ರಾಜೀ ಮಾಡಿಕೊಳ್ಳುತ್ತಿರಿಲಿಲ್ಲ. ಸ್ವಾರ್ಥಕ್ಕಾಗಿ ಅದನ್ನು ಬಲಿ ಕೊಟ್ಟಿರಲಿಲ್ಲ. ನಮ್ಮ ಸರ್ಕಾರದ ವಿರುದ್ಧ ಹೋರಾಟವನ್ನು ಮಾಡಿದ್ದಾರೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಕೆಲಸವನ್ನು ನಿರ್ಭಯವಾಗಿ ನಿಷ್ಟೂರವಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣ ಅವರ ಕಾಲದಲ್ಲೂ ವಿರೋಧ ಪಕ್ಷದ ನಾಯಕರಾಗಿದ್ದರು. ಅವರು ಕೇವಲ ಉತ್ತರ ಕರ್ನಾಟ ನಾಯಕರಲ್ಲ, ಅವರು ಇಡೀ ರಾಜ್ಯದ ನಾಯಕರು. ಲಂಗಾಯತ ಸಮಾಜ ದೊಡ್ಡ ಸಮಾಜ. ಸಮಾನ್ಯವಾಗಿ ಯಡಿಯೂರಪ್ಪ ಅವರನ್ನು ಆ ಸಮಾಜದ ನಾಯಕ ಎಂದು ಬಿಂಬಿಸುತ್ತಾರೆ. ಎರಡನೇ ಸ್ಥಾನದಲ್ಲಿ ನೋಡುತ್ತಿದ್ದದ್ದು ಶೆಟ್ಟರ್ ಅವರನ್ನು. ಬಿಜೆಪಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ನಿರ್ದಾಕ್ಷಣ್ಯವಾಗಿ ತೆಗೆದು ಅಪಮಾನ ಮಾಡಿದರು. ಅವರ ಕಣ್ಣೀರು ಹಾಕಿಸಿದರು. ಜಗದೀಶ್ ಶೆಟ್ಟರ್ ಅವರು ಲಿಂಗಾಯತ ಸಮಾಜದ ದೊಡ್ಡ ನಾಯಕರೆಂದು ಗುರುತಿಸಿಕೊಂಡಿದ್ದರು. ಅವರು ಬಹಳ ನೋವಿನಿಂದ ಮಾತನಾಡಿದ್ದಾರೆ. ಬಹುಶಃ ಬಿಜೆಪಿ ಅವರನ್ನು ನಡೆಸಿಕೊಂಡಿರುವ ರೀತಿ ಯಾವ ಪಕ್ಷದಲ್ಲಿ ಯಾವುದೇ ನಾಯಕರಿಗೆ ಆಗಬಾರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಯಾವುದೇ ಕಾರಣ ಇಲ್ಲದೇ, ಆರೋಪವಿಲ್ಲದೆ, ಬಿಜೆಪಿಯವರು ಅವರಿಗೆ ಟಿಕೆಟ್ ವಂಚಿಸಿದ್ದಾರೆ. ಇದು ದುರುದ್ದೇಶ ಎಂದು ಎಲ್ಲರಿಗೂ ಅರ್ಥವಾಗುತ್ತದೆ. ನಾನು ನೋಡಿದಾಗೆ ಶೆಟ್ಟರ್ ಅವರು ರಾಜ್ಯದ ರಾಜಕಾರಣಿಗಳಲ್ಲಿ ಸ್ವಾಭಿಮಾನಿ ರಾಜಕಾರಣಿ. ಎವರು ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಕೆಲಸ ಮಾಡಿಲ್ಲ. ಈಗ ಅವರ ಸ್ವಾಭಿಮಾನ, ಸಮುದಾಯಕ್ಕೆ ಧಕ್ಕೆಯಾಗಿದೆ. ಅವರ ಅನುಯಾಯಿ, ಸ್ನೇಹಿತರಿಗೆ ಧಕ್ಕೆಯಾಗಿದೆ. ಇದು ಸಹಿಸಲಾಗದ ಅಪಮಾನ. ನಾನು ಕೂಡ ಇದನ್ನು ನಿರೀಕ್ಷೆ ಮಾಡಿರಲಿಲ್ಲ. ನಿಮಗೆ ಇಂತಹ ಅನ್ಯಾಯವಾಗುತ್ತದೆ ಎಂದು ಭಾವಿಸಿರಲಿಲ್ಲ ಎಂದು ಅವರನ್ನು ಭೇಟಿಯಾದಾಗ ಹೇಳಿದೆ. ಈ ರೀತಿ ಏಕಾಏಕಿ, ಯಾವುದೇ ಮುನ್ಸೂಚನೆ ಇಲ್ಲದೆ ಟಿಕೆಟ್ ತಪ್ಪಿಸಿರುವುದು ಘೋರ ಅಪರಾಧ. ಅವರು ತಮ್ಮ ಸ್ವಾಭಿಮಾನ ರಕ್ಷಣೆಗೆ ಪಕ್ಷ ಬಿಡಲು ತೀರ್ಮಾನಿಸಿದ್ದಾರೆ. ಅವರು ಎಲ್ಲರ ಜತೆ ಚರ್ಚಿಸಿ ಅಳೆದು ತೂಗಿ ಇದನ್ನು ಸವಾಲು ಎಂದು ಸ್ವೀಕರಿಸಿ ಅಂತಿಮವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರು, ಪ್ರದಾನ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಅವರು ಪಕ್ಷ ಸೇರುತ್ತಿದ್ದಾರೆ. ನಾವೆಲ್ಲರೂ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುತ್ತೇವೆ.

 

Share Post