BengaluruPolitics

ನಾಳೆಯೇ ಬಿಜೆಪಿ ಸೇರ್ತಾರಾ ಮಂಡ್ಯ ಎಂಪಿ ಸುಮಲತಾ..?; ಸಂಸತ್‌ ಸ್ಥಾನ ಏನು ಮಾಡ್ತಾರೆ..?

ಮಂಡ್ಯ; ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರು ಬಿಜೆಪಿ ಸೇರೋದು ಬಹುತೇಕ ಪಕ್ಕಾ ಆಗಿದೆ. ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳೋದಕ್ಕೆ ಬಿಜೆಪಿ ಹೈಕಮಾಂಡ್‌ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಸುಮಲತಾ ಅವರು ನಾಳೆಯೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್‌ ಶಾಸಕ ಪುಟ್ಟರಾಜು ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ್ದು, ನನಗೆ ಇರುವ ಮಾಹಿತಿ ಪ್ರಕಾರ ಸುಮಲತಾ ಅವರು ನಾಳೆಯೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದಾರೆ. ಮOದಿ ಸಮ್ಮುಖದಲ್ಲಿ ಬಿಜೆಪಿ ಸೇರಲು ಸುಮಲತಾ ಬಯಸಿದ್ದರು. ಆದ್ರೆ ಅದು ಸರ್ಕಾರಿ ಕಾರ್ಯಕ್ರಮವಾದ್ದರಿಂದ ಹೈಕಮಾಂಡ್‌ನಿಂದ ರೆಡ್‌ ಸಿಗ್ನಲ್‌ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ನಾಳೆಯೇ ಬಿಜೆಪಿ ಸೇರಿ, ಮಾರ್ಚ್‌ 12 ರಂದು ನಡೆಯಲಿರುವ ಬೆಂಗಳೂರು-ಮೈಸೂರು ಹೆದ್ದಾರಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಈಗಾಗಲೇ ಸುಮಲತಾ ಅವರು ಬೆಂಗಳೂರು ಹಾಗೂ ಮಂಡ್ಯದಲ್ಲಿನ ಆಪ್ತರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಎಲ್ಲರೂ ಬಿಜೆಪಿ ಸೇರ್ಪಡೆಗೆ ಒಪ್ಪಿಗೆ ಸೂಚಿಸಿರುವುದರಿಂದ ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಸುಮಲತಾ ಅವರು ಬಿಜೆಪಿ ಸೇರಿದರೆ ಸಂಸತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಸೇರಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಅವರು ಅನರ್ಹರಾಗುತ್ತಾರೆ ಎಂದು ತಿಳಿದುಬಂದಿದೆ. ಸುಮಲತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಪಕ್ಷೇತರ ಅಭ್ಯರ್ಥಿ ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗಲು ಮೊದಲು ಆರು ತಿಂಗಳವರೆಗೆ ಮಾತ್ರ ಅನುಮತಿ ಇರುತ್ತದೆ. ಅನಂತರ ಸೇರ್ಪಡೆಯಾದರೆ ಅದು ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆಯಾಗುತ್ತದೆ ಎಂದು ತಿಳಿದುಬಂದಿದೆ.

Share Post