BengaluruPolitics

ಪಿಯುಸಿ ಪರೀಕ್ಷೆ ಹಿನ್ನೆಲೆ; ನಾಳೆಯ ರಾಜ್ಯ ಬಂದ್‌ ವಾಪಸ್‌ ಪಡೆದ ಕಾಂಗ್ರೆಸ್‌

ಬೆಂಗಳೂರು; ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಳೆ ಎರಡು ಗಂಟೆಗಳ ಕಾಲ ರಾಜ್ಯ ಬಂದ್‌ಗೆ ಕರೆ ನೀಡಿತ್ತು. ಆದ್ರೆ ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿ ಹಲವು ಪರೀಕ್ಷೆಗಳಿರುವುದರಿಂದ ಬಂದ್‌ ಮಾಡದಿರಲು ನಿರ್ಧರಿಸಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಹಿನ್ನೆಲೆಯಲ್ಲಿ ಸಾಂಕೇತಿಕ ಕರ್ನಾಟಕ ಬಂದ್‌ನ್ನು ವಾಪಸ್‌ ತೆಗೆದುಕೊಳ್ಳುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ‘ಬಿಜೆಪಿ ಸರ್ಕಾರದ ಮಿತಿಮೀರಿದ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಮಾ.9 ರ ಬೆಳಗ್ಗೆ 9 ಗಂಟೆಯಿಂದ 11 ರವರೆಗೆ ಎರಡು ಗಂಟೆಗಳ ಕಾಲ ಸಾಂಕೇತಿಕ ಬಂದ್ ಮಾಡಲು ಕಾಂಗ್ರೆಸ್ ನಿರ್ಧರಿಸಿತ್ತು.

ಆದರೆ ಪರೀಕ್ಷೆಗಳು ಇರುವ ಕಾರಣ ಬಂದ್ ನಿಂದ ನಮಗೆ ತೊಂದರೆಯಾಗಲಿದೆ ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅವರ ಹಿತ ನಮ್ಮ ಆದ್ಯತೆ. ಹೀಗಾಗಿ ಅವರ ಅಭಿಪ್ರಾಯಕ್ಕೆ ಗೌರವ ನೀಡಿ ಬಂದ್ ಕರೆ ವಾಪಸ್ ಪಡೆಯಲು ತೀರ್ಮಾನಿಸಿದ್ದೇವೆ’ ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

Share Post