Bengaluru

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ; ನಾಳೆ ಸಿಎಂ ಮನೆಗೆ ಕಾಂಗ್ರೆಸ್‌ ಮುತ್ತಿಗೆ

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವಂತೆ ಒತ್ತಾಯಿಸಿ ನಾಳೆಯಿಂದ ಐದು ದಿನ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 10.30ಕ್ಕೆ ಸಿಎಂ ಸರ್ಕಾರಿ ನಿವಾಸಕ್ಕೆ ಘೇರಾವ್ ಹಾಕುತ್ತೇವೆ ಎಂದು ಹೇಳಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು.

ಸಂತೋಷ್ ಪಾಟೀಲ್ ಕುಟುಂಬದವರನ್ನು ಇಂದು ಭೇಟಿ ಮಾಡಿ ಧೈರ್ಯ ತುಂಬಲಿದ್ದೇವೆ ಎಂದರು. ಸಂತೋಷ್​ ಅವರ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಯಾಕೆ ವಿಳಂಬ ಅನ್ನೋದು ಗೊತ್ತಾಗುತ್ತಿಲ್ಲ. ಈ ಪ್ರಕರಣ ದೇಶದಲ್ಲೇ ದೊಡ್ಡ ದುರಂತ. ಅವರು ರಾಜೀನಾಮೆ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಆದ್ರೆ ಮೊದಲು ಅವರನ್ನು ಅರೆಸ್ಟ್ ಮಾಡಬೇಕು. ಸರ್ಕಾರ, ಪೊಲೀಸರು ಅವರ ರಕ್ಷಣೆಗೆ ಹೊರಟಿದ್ದಾರೆ ಎಂದು ಅವರು ದೂರಿದರು.

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಸಚಿವ ಈಶ್ವರಪ್ಪನವರ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿ ಸಂತೋಷ್ ಪಾಟೀಲ್ ಕುಟುಂಬದವರು ದೂರು ಕೊಟ್ಟಿದ್ದಾರೆ. ಆದರೆ ಪೊಲೀಸರು ಭ್ರಷ್ಟಾಚಾರ ಅಡಿಯಲ್ಲಿ ಈಶ್ವರಪ್ಪರ ಮೇಲೆ ಕೇಸ್ ಹಾಕಿಲ್ಲ. ಇಡೀ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪವಿದೆ. ರಾಜ್ಯ ಗುತ್ತಿಗೆದಾರರ ಸಂಘವೇ ಈ ಆರೋಪ ಮಾಡಿದೆ. ಇಡೀ ದೇಶದಲ್ಲಿ ಕರ್ನಾಟಕ ಅತ್ಯಂತ ಭ್ರಷ್ಟ ಸರ್ಕಾರ ಎಂದು ಆರೋಪಿಸಿದರು.

Share Post