BengaluruPolitics

ಜು.03ರಿಂದ ಅಧಿವೇಶನ; ಜೂನ್‌ 26ರಿಂದ ನೂತನ ಶಾಸಕರಿಗೆ ತರಬೇತಿ

ಬೆಂಗಳೂರು; 16ನೇ ವಿಧಾನಸಭೆಗೆ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26ರಿಂದ ಜೂ.28ರವರೆಗೆ ಮೂರು ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ಈ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿಗೆ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ತಿಳಿಸಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಮತ್ತು ಯುವಜನರ ಆಲೋಚನೆಗಳು,ದೂರದೃಷ್ಟಿ,ಪ್ರತಿಭೆ ಬಿಂಬಿಸಲು ನಮ್ಮ ಸಚಿವಾಲಯದ ಮುಖಾಂತರ 03ದಿವಸಗಳ ಕಾಲ ಪ್ರಕೃತಿ ಮತ್ತು ತರಬೇತಿ ಶಿಬಿರವನ್ನು ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ನಡೆಸಲಾಗುತ್ತದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದ್ದು,ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳುವಂತೆ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಮನವಿ ಮಾಡಿದರು.

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು(ಕಾರ್ಯಕ್ರಮಗಳು) ನಡೆಯಲಿವೆ ಎಂದರು.   ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದರು. ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ.  ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ,ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು,ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಸೇರಿದಂತೆ ವಿಧಾನಮಂಡಲದ ಕಾರ್ಯಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ ಎಂದರು.

Share Post