Bengaluru

ಹಿಂದಿ ರಾಷ್ಟ್ರಭಾಷೆ ವಿಚಾರ; ಅಜಯ್‌ ದೇವಗನ್‌ಗೆ ಹೆಚ್ಡಿಕೆ, ಸಿದ್ದು ಟಾಂಗ್‌

ಬೆಂಗಳೂರು: ನಟ ಸುದೀಪ್‌ ಹೇಳಿಕೆಯನ್ನು ವಿರೋಧಿಸಿ ಟ್ವೀಟ್‌ ಮಾಡಿದ್ದ ಬಾಲಿವುಡ್‌ ನಟ ಅಜಯ್‌ ದೇವಗನ್‌ ವಿರುದ್ಧ ಸಮರ ಮುಂದುವರೆದಿದೆ. ಹಿಂದಿ ರಾಷ್ಟ್ರಭಾಷೆ ಎಂಬ ಅಜಯ್‌ ದೇವಗನ್‌ ಹೇಳಿಕೆಗೆ ರಾಜಕಾರಣಿಗಳು ಕೂಡಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಟ್ವೀಟ್‌ ಮಾಡಿ, ಸುದೀಪ್‌ ಹೇಳಿಕೆಯನ್ನು ಸಮರ್ಥಿಸಿ, ಅಜಯ್‌ ದೇವಗನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

ಕುಮಾರಸ್ವಾಮಿ ಟ್ವೀಟ್‌ಗಳ ವಿವರ

ಚಿತ್ರನಟ @KicchaSudeep  ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ @ajaydevgn  ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ.

 

ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ.

 

ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?

 

ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ ಹಿಂದಿ ರಾಜಕೀಯ ಪಕ್ಷಗಳು ‘ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ.

 

ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ. 
ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ’ ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು.
ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ.
ಹೀಗಂತ ಕುಮಾರಸ್ವಾಮಿಯವರು ಸರಣಿ ಟ್ವೀಟ್‌ ಮಾಡಿದ್ದಾರೆ.
ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೂಡಾ ಟ್ವೀಟ್‌ ಮಾಡಿದ್ದು, ಅದರ ವಿವರ ಹೀಗಿದೆ..

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಮುಂದೆ ಆಗುವುದೂ ಇಲ್ಲ. ನಮ್ಮ ದೇಶದ ಭಾಷಾ ವೈವಿಧ್ಯತೆ ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಪ್ರತಿಯೊಂದು ಭಾಷೆಯು ತನ್ನದೇ ಆದ ಶ್ರೀಮಂತ ಇತಿಹಾಸ ಹೊಂದಿದೆ, ಅದರ ಬಗ್ಗೆ ಜನರು ಹೆಮ್ಮೆಪಡುತ್ತಾರೆ. ನಾನು ಹೆಮ್ಮೆಯ ಕನ್ನಡಿಗ.

Share Post