BengaluruPolitics

ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ; ಬಿಎಸ್‌ವೈ ಘೋಷಣೆ

ಶಿವಮೊಗ್ಗ; ಪುತ್ರನಿಗೆ ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಲು ಮಾಜಿ ಸಿಎಂ ಯಡಿಯೂರಪ್ಪ ಮನಸು ಮಾಡಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯೇಂದ್ರ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಂದು ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶಿಕಾರಿಪುರದಲ್ಲಿ ಮಾತನಾಡಿರುವ ಯಡಿಯೂರಪ್ಪ ಅವರು, ವಿಜಯೇಂದ್ರ ಅವರು ಇಲ್ಲಿಂದಲೇ ಸ್ಪರ್ಧೆ ಮಾಡುತ್ತಾರೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ವಿಜಯೇಂದ್ರ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಆ ಕ್ಷೇತ್ರದಲ್ಲಿ ಭರ್ಜರಿಯಾಗಿ ಸಂಘಟನೆಯನ್ನೂ ಮಾಡಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಇದೀಗ ವಿಜಯೇಂದ್ರ ಅವರು, 2023 ರ ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ಕುತೂಹಲ ಇತ್ತು. ಆದ್ರೆ ಯಡಿಯೂರಪ್ಪ ಅವರು ಆ ಕುತೂಹಲವನ್ನು ತಣಿಸಿದ್ದಾರೆ. ನಾನು ಶಿಕಾರಿಪುರ ಕ್ಷೇತ್ರವನ್ನು ತೊರೆಯುತ್ತಿರುವುದರಿಂದ ಅಲ್ಲಿಂದ ವಿಜಯೇಂದ್ರ ಅವರು ಸ್ಪರ್ಧಿಸುತ್ತಾರೆ ಎಂದು ಹೇಳಿದ್ದಾರೆ.

ಮೈಸೂರು ಭಾಗದಿಂದ ವಿಜಯೇಂದ್ರ ಸ್ಪರ್ಧೆ ಮಾಡಬೇಕೆಂದು ಬೆಂಬಲಿಗರು ಹೇಳುತ್ತಿದ್ದಾರೆ. ಆದ್ರೆ ಶಿಕಾರಿಪುರ ಕ್ಷೇತ್ರ ತೆರವಾಗುತ್ತಿರುವುದರಿಂದ ಅವರನ್ನು ಇಲ್ಲಿಂದಲೇ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಶಿಕಾರಿಪುರದ ಮತದಾರರು ಅವರನ್ನು ಆಶೀರ್ವದಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಇದೇ ವೇಳೆ ಬಿಎಸ್‌ವೈ ರಾಜಕೀಯ ನಿವೃತ್ತಿ ಹೊಂದುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬಿ.ವೈ.ವಿಜಯೇಂದ್ರ, ನಿವೃತ್ತಿ ಅನ್ನೋದು ಬಿಎಸ್‌ವೈ ಡಿಕ್ಷನರಿಯಲ್ಲೇ ಇಲ್ಲ. ಈ ಹಿಂದೆ ಕೂಡಾ ಅವರು ಪಕ್ಷ ಸಂಘಟನೆ ಮಾಡಿದ್ದರು. ಮುಂದೆಯೂ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಾರೆ ಎಂದು ಹೇಳಿದರು.

 

Share Post