CrimeNational

ತೆಲಂಗಾಣದಲ್ಲಿ ದಾರುಣ ಘಟನೆ; ವಿದ್ಯುತ್‌ ಸ್ಪರ್ಶಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಕಾಮರೆಡ್ಡಿ; ತೆಲಂಗಾಣದಲ್ಲಿ ಕಾಮರೆಡ್ಡಿ ಜಿಲ್ಲೆಯಲ್ಲಿ ದಾರುಣ ಘಟನೆ ನಡೆದಿದೆ. ವಿದ್ಯುತ್‌ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಸೇರಿದ್ದಾರೆ.

   ಕಾಮರೆಡ್ಡಿಯ ಬೀಡಿ ವರ್ಕರ್ಸ್‌ ಕಾಲೋನಿಯಲ್ಲಿ ಈ ದುರ್ಘಟನೆ ನಡೆದಿದೆ. ಆಟೋ ಚಾಲಕನಾದ ಕಾಲೋನಿಯ ಅಹಮದ್ (35), ಪತ್ನಿ ಪರ್ವೀನ್ (30), ಮಗಳು ಮಹಿಮ್ (6), ಮಕ್ಕಳಾದ ಫೈಜಾನ್ (5) ಮತ್ತು ಅದ್ನಾನ್ (3) ಸಣ್ಣ ಹುಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದರು. ಮಳೆ ಕಾರಣಕ್ಕೆ ಶಾಲೆಗೆ ರಜೆ ನೀಡಲಾಗಿತ್ತು. ಫೈಜಾನ್​ನನ್ನು ಅಜ್ಜಿ ಮನೆಯಲ್ಲಿ ಬಿಟ್ಟು, ಉಳಿದವರು ಮನೆಯಲ್ಲಿದ್ದರು.

    ಮನೆಗೋಡೆಗೆ ಕಟ್ಟಿದ್ದ ಕಬ್ಬಿಣದ ತಂತಿ ಮೇಲೆ ಬಟ್ಟೆ ಒಣಗಿಸುತ್ತಿದ್ದಾಗ ಪರ್ವೀನ್​ಗೆ ವಿದ್ಯುತ್ ಸ್ಪರ್ಶಿಸಿದೆ. ಕೂಡಲೇ ಆಕೆಯನ್ನು ರಕ್ಷಿಸಲು ಬಂದ ಅಹಮದ್‌ಗೂ ಶಾಕ್ ಹೊಡೆದಿದೆ. ತಂದೆ-ತಾಯಿ ಕುಸಿದು ಬೀಳುವುದನ್ನು ಕಂಡ ಮಗಳು ಮಹೀಮ್ ಮತ್ತು ಮಗ ಅದ್ನಾನ್​ ಇಬ್ಬರೂ ಪೋಷಕರ ಬಳಿ ಹೋಗಿದ್ದಾರೆ. ಆಗ ಅವರಿಗೂ ವಿದ್ಯುತ್ ಸ್ಪರ್ಶಿಸಿದೆ.

    ಮಕ್ಕಳ ಆಕ್ರಂದನ ಕೇಳಿದ ಅಕ್ಕಪಕ್ಕದ ಮನೆಯವರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ತಕ್ಷಣವೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾರೆ. ಆದ್ರೆ ಅಷ್ಟೊತ್ತಿಗಾಗಲೇ ನಾಲ್ವರೂ ಪ್ರಾಣ ಕಳೆದುಕೊಂಡಿದ್ದರು ಎಂದು ತಿಳಿದುಬಂದಿದೆ.

Share Post