CrimeDistricts

ಸಮಾಜ ಸೇವೆಯೇ ಬದುಕಾಗಿಸಿಕೊಂಡಿದ್ದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ; ಕಾಪು ತಾಲ್ಲೂಕಿನಲ್ಲಿ ಸಮಾಜಸೇವೆ ಮಾಡಿಕೊಂಡು, ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿ ಒಳ್ಳೆಯ ಕೀರ್ತಿ ಸಂಪಾದಿಸಿದ್ದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಅವರು ಕಾಪುವಿನ ತಮ್ಮ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ್ದಾರೆ.

ಕಳೆದ ರಾತ್ರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ಬೆಳಕಿಗೆ ಬಂದಿದೆ. ಲೀಲಾಧರಶೆಟ್ಟಿಯವರು ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸಮಾಜಸೇವೆ ಮಾಡುತ್ತಾ, ಧಾರ್ಮಿಕ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ರಂಗಕರ್ಮಿಯೂ ಆಗಿದ್ದ ಅವರು, ರಂಗತರಂಗ ಎಂಬ ನಾಟಕ ತಂಡವನ್ನೂ ಕಟ್ಟಿ ಬೆಳೆಸಿದ್ದರು. ರಾಜಕೀಯದಲ್ಲೂ ಅವರು ಗುರುತಿಸಿಕೊಂಡಿದ್ದರು. ಈ ಹಿಂದೆ ಲೀಲಾಧರ ಶೆಟ್ಟಿವರು ಕಾಪು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.

ಕೌಟುಂಬಿಕ ಜಗಳಗಳಿಂದಾಗಿಯೇ ಇಬ್ಬರೂ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Share Post