BengaluruDistricts

ಸದ್ಯಕ್ಕೆ ರಾಜ್ಯದಲ್ಲಿ ಶಾಲೆಗಳು ಬಂದ್‌ ಮಾಡಲ್ಲ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.


ರಾಜ್ಯದಲ್ಲಿ 48 ಸಾವಿರ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿದ್ದು, ಯಾವ ಶಾಲೆಯಲ್ಲೂ ಮಕ್ಕಳಿಗೆ ಕೋವಿಡ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವಂತೆ ಆರೋಗ್ಯವನ್ನೂ ಗಮನಿಸಲಾಗುತ್ತಿದೆ. ಪ್ರತಿ ಅರ್ಧ ಹಾಗೂ ಒಂದು ಗಂಟೆಗೆ ಒಮ್ಮೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಂದ ಶಿಕ್ಷಣ ಇಲಾಖೆ ವರದಿ ಪಡೆದುಕೊಳ್ಳುತ್ತಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ಜತೆಗೂ ಹಂಚಿಕೊಳ್ಳಲಾಗುತ್ತಿದೆ ಎಂದು ವಿವರಿಸಿದರು.

Share Post