Districts

ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ FMCG ಕ್ಲಸ್ಟರ್ ಸ್ಥಾಪನೆ: ಸಚಿವ ನಿರಾಣಿ ಘೋಷಣೆ 

ಹುಬ್ಬಳ್ಳಿ: ಕಿತ್ತೂರು ಕರ್ನಾಟಕದ ಕೇಂದ್ರ ಬಿಂದು ಹುಬ್ಬಳ್ಳಿ-ಧಾರವಾಡ ಅವಳಿ ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನಗಳ ಕ್ಲಸ್ಟರ್ ಸ್ಥಾಪನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿಚ ಮುರುಗೇಶ ನಿರಾಣಿ ಹೇಳಿದ್ದಾರೆ.

ಟೈ ಹುಬ್ಬಳ್ಳಿ ಆಯೋಜಿಸಿದ್ದ ಟೈಕಾನ್ 2022ನಲ್ಲಿ ಶನಿವಾರ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಎಪ್ಎಂಸಿಜಿ ಕ್ಲಸ್ಟರ್ ಸ್ಥಾಪನೆಯಾಗುತ್ತಿರುವುದರಿಂದ ಇಲ್ಲಿ ಭಾರೀ ಮೊತ್ತದ ಬಂಡವಾಳ ಹೂಡಿಕೆಯಾಗಲಿದ್ದು, ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು. ಹೊಸದಾಗಿ ಸ್ಥಾಪನೆಯಾಗುತ್ತಿರುವ FMCG ಕ್ಲಸ್ಟರ್‌ಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳ ಜೊತೆಗೆ ರಾಜ್ಯ ಸರ್ಕಾರ ಸಾಕಷ್ಟು ರಿಯಾಯಿತಿಯನ್ನು ನೀಡಿದೆ ಎಂದರು.

ಹುಬ್ಬಳ್ಳಿ ಬೆಳಗಾವಿ ಮಾರ್ಗ ಮಧ್ಯೆ ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಚರ್ಚೆಯ ಹಂತದಲ್ಲಿದೆ. ಖಾನಾಪುರ ರೈಲ್ವೆ ನಿಲ್ದಾಣದ ಬಳಿ ಕೈಗಾರಿಕೆಗಳ ಸ್ಥಾಪನೆಗೆ ಸಾವಿರ ಎಕರೆ ಭೂಸ್ವಾಧಿನ ಪ್ರಕ್ರಿಯೆ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ನಿರಾಣಿ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮಂಡಿಸಿದ ಕೈಗಾರಿಕೆಗಳ ಉತ್ತೇಜನಕ್ಕೆ ಸಾಕಷ್ಟು ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣವಾಗುತ್ತಿದ್ದು, ಬಂಡಾವಳ ಹೂಡಿಕೆಯಲ್ಲಿ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ಕೊಂಡಯ್ಯಲು ನಾವು ಸರ್ವ ಪ್ರಯತ್ನ ಮಾಡುತ್ತಿರುವುದಾಗಿ ಮಾಹಿತಿ ನೀಡಿದರು.

Share Post