CrimeDistricts

ಹಾಸ್ಟೆಲ್‌ನಲ್ಲಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ

ಮೈಸೂರು; ಹಾಸ್ಟೆಲ್‌ನಲ್ಲಿ ತಂಗಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ, ಹಾಸ್ಟೆಲ್‌ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಪಡುವಾರಹಳ್ಳಿಯ ಬಿಜಿಎಸ್ ಒಕ್ಕಲಿಗರ ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ.  

   ಹೆಚ್​​ಡಿ ಕೋಟೆ ಮೂಲದ ಪ್ರಥಮ ಪಿಯುಸಿ ವಿದ್ಯಾರ್ಥಿ ದೀಕ್ಷಿತ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ದೀಕ್ಷಿತ್‌ ಕುವೆಂಪು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. ಪಡುವಾರಹಳ್ಳಿ ಒಕ್ಕಲಿಗರ ವಿದ್ಯಾರ್ಥಿನಿಲಯದಲ್ಲಿದ್ದು ಓದುತ್ತಿದ್ದ.

ನಿನ್ನೆ ಸಂಜೆ ಹಾಸ್ಟೆಲ್ ಕೊಠಡಿಯೊಳಗೆ ಹೋಗಿ ದೀಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ 11.30 ಆದರೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹೀಗಾಗಿ, ಪಕ್ಕದ ಕೊಠಡಿಯ ವಿದ್ಯಾರ್ಥಿಗಳು ಹಾಸ್ಟೆಲ್ ಮೇಲ್ವಿಚಾರಕರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಕೊಠಡಿ ಬಾಗಿಲು ಮುರಿದಾಗ ದೀಕ್ಷಿತ್‌ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post