DistrictsPolitics

ಬಿಜೆಪಿ ಸರ್ಕಾರ ರಾಜ್ಯಕ್ಕೆ ದೊಡ್ಡ ಕಳಂಕ; ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್‌

ಬೆಳಗಾವಿ; ಇಂದಿನಿಂದ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಶುರುವಾಗಿದೆ. ಬೆಳಗಾವಿಯಲ್ಲಿ ಮಹಾತ್ಮಾಗಾಂಧಿಜಿಯವರು ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅದೇ ಸ್ಥಳದಿಂದ ಕಾಂಗ್ರೆಸ್‌ ಬಸ್‌ ಯಾತ್ರೆ ಶುರು ಮಾಡಲಾಗಿದೆ. ಈ ವೇಳೆ ಮಾಧ್ಯಮಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಬದಲಾವಣೆಗೆ ಇಂದು ನಾಂದಿ ಹಾಡುತ್ತಿದ್ದೇವೆ. ಗಾಂಧಿಜಿಯವರು ಈ ಭೂಮಿಯಿಂದ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ ವಹಿಸಿಕೊಂಡು ದೇಶಕ್ಕೆ ಸ್ವಾತಂತ್ಯ ತಂದು ಕೊಟ್ಟರು. ಹೀಗಾಗಿ ಇಲ್ಲಿಂದಲೇ ಯಾತ್ರೆ ಶುರು ಮಾಡುತ್ತಿದ್ದೇವೆ. ಕಾಂಗ್ರೆಸ್‌ ಈ ದೇಶವನ್ನು ಅರವತ್ತು ವರ್ಷಗಳ ಕಾಲ ಆಳಿದೆ. ರಾಜ್ಯದಲ್ಲೂ ಅತಿಹೆಚ್ಚು ವರ್ಷ ಕಾಂಗ್ರೆಸ್‌ ಆಳ್ವಿಕೆ ನಡೆಸಿದೆ. ಈ ವೇಳೆ ಸಾಕಷ್ಟು ಬದಲಾವಣೆಗಳನ್ನು ತಂದಿದ್ದೇವೆ. ಆದ್ರೆ ಬಿಜೆಪಿ ಸರ್ಕಾರ ರಾಜ್ಯಕ್ಕೆ ದೊಡ್ಡ ಕಳಂಕವಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಾವು ಜನರ ಬಳಿಗೆ ಹೋಗುತ್ತಿದ್ದೇವೆ. ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ತಪ್ಪುಗಳನ್ನು ಜನರ ಮುಂದಿಡುತ್ತೇವೆ. ಜೊತೆಗೆ ಜನರ ಅಭಿಪ್ರಾಯ ಸಂಗ್ರಹಿಸಿ, ಪ್ರಜೆಗಳ ಧ್ವನಿಯಾಗುತ್ತೇವೆ. ಮೊದಲು ಜಿಲ್ಲಾ ಕೇಂದ್ರಗಳಲ್ಲಿ ಪ್ರವಾಸ ಮಾಡುತ್ತೇವೆ. ಅನಂತರ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

Share Post