National

ಎಸ್‌.ಎಂ.ಕೃಷ್ಣ, ಇನ್ಫಿ ನಾರಾಯಣಮೂರ್ತಿ, ಪ್ರಕಾಶ್‌ ಪಡುಕೋಣೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು; ರಾಜ್ಯ ಸರ್ಕಾರದಿಂದ ಕೆಂಪೇಗೌಡರ ಗೌರವಾರ್ಥ ನೀಡುವ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ಇನ್ಪೊಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಹಿರಿಯ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ವಿಚಾರವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದು, ವಿಧಾನಸೌಧದಲ್ಲಿ ಜೂನ್‌ 27ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಜೂನ್‌ 27ರಂದು ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಮೂವರಿಗೂ ತಲಾ 5 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟ್‌ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಇದರಲ್ಲಿ ಉದ್ಯಮಿ ಮೋಹನದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸ್ಥಾಪಕ ಆರ್. ಬಾಲಸುಬ್ರಹ್ಮಣ್ಯಂ, ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ .ಶಂಕರಲಿಂಗೇಗೌಡ ಅವರು ಸದಸ್ಯರಾಗಿದ್ದರು. ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಆರ್. ವಿನಯದೀಪ್ ಅವರು ಸದಸ್ಯ ಕಾರ್ಯದರ್ಶಿ ಆಗಿದ್ದರು.

Share Post